ಪಂಚಾಯತ್ ಮತ್ತು ಇತರೆ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಪಕ್ಷದ ನೆಲೆಯನ್ನು ಬಲಪಡಿಸಲು ಬಿಜೆಪಿ ನಿರ್ಧರಿಸಿದೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ, ಪಕ್ಷದ ಸಂಘಟನೆಯನ್ನು ಬಲಪಡಿಸಲು ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷವು ತನ್ನ ಮೂವರು ಶಾಸಕರಾದ ಯಲಹಂಕ ಶಾಸಕ ಎಸ್.ಟಿ. ಸೋಮಶೇಖರ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಿದ್ದು,
ಇದರ ಬೆನ್ನಲ್ಲೇ ಕೋರ್ ಕಮಿಟಿ ಸಭೆ ನಡೆಸಿ, ಪಕ್ಷದ ಬಲವರ್ಧನೆಗೆ ನಿರ್ಧಾರ ಕೈಗೊಂಡಿದೆ. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೊಲೆಗಳು, ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣಗಳು
ಮತ್ತು ಛಲವಾದಿ ನಾರಾಯಣಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಗಳ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಪಕ್ಷ ದುರ್ಬಲವಾಗಿರುವ ಜಿಲ್ಲೆಗಳನ್ನು ಬಲಪಡಿಸುವ ಮಾರ್ಗಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಕೋರ್ ಕಮಿಟಿ ಸದಸ್ಯರು ಮತ್ತು ಹಾಲಿ ಮತ್ತು ಮಾಜಿ ಶಾಸಕರನ್ನು ಒಳಗೊಂಡ ಪ್ರತಿಯೊಂದು ತಂಡವು 2-3 ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ಮುಂದಿನ 10 ದಿನಗಳಲ್ಲಿ ಖಾಲಿ ಇರುವ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ಆಂತರಿಕ ಮೂಲಗಳು ಮಾಹಿತಿ ನೀಡಿವೆ.
ಏತನ್ಮಧ್ಯೆ, ಕೇಂದ್ರ ಸಚಿವರು ಸೇರಿದಂತೆ ಹೈಕಮಾಂಡ್ ನಾಯಕರು ಕರ್ನಾಟಕಕ್ಕೆ ಭೇಟಿ ನೀಡದಿರುವ ಬಗ್ಗೆ ಕೆಲವು ರಾಜ್ಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕೇಂದ್ರ ನಾಯಕರು ರಾಜ್ಯಕ್ಕೆ ಬಂದು ನಮ್ಮನ್ನು ಭೇಟಿಯಾದರೆ, ಪಕ್ಷದ ಕಾರ್ಯಕರ್ತರ ಮನೋಸ್ಥೈರ್ಯ ಕೂಡ ಹೆಚ್ಚಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ಬಯಸದ ನಾಯಕರೊಬ್ಬರು ಹೇಳಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ನಾಯಕರ ನಡುವೆ ಸಮನ್ವಯದ ಕೊರತೆಯಿರುವ ವಿಚಾರದ ಕುರಿತಂತೆಯೂ ಚರ್ಚೆ ನಡೆದಿದೆ. ಪಕ್ಷದ ಚಟುವಟಿಕೆಗಳು ಸಾರ್ವಜನಿಕ ಚಳುವಳಿಯಾಗಿ ಬದಲಾಗಬೇಕು… ಆಗ ಮಾತ್ರ ನಾವು ಜನರನ್ನು ತಲುಪಲು ಸಾಧ್ಯ ಎಂದು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ತಿಳಿಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ರಾಜ್ಯದಲ್ಲಿ ಪಕ್ಷದ ಸಂಘಟನೆ ಮತ್ತು ನೆಲೆಯನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಾಗಿದೆ
. ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಅಮಾನತುಗೊಳಿಸಿದೆ, ಹಿಂದಿನ ಕೋರ್ ಕಮಿಟಿ ಸಭೆಯಲ್ಲಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು
. ಪಕ್ಷದ ಹೈಕಮಾಂಡ್ ಗಮನಕ್ಕೆ ತರಲಾಗಿತ್ತು. ಇಂದಿನ ಸಭೆಯಲ್ಲಿ, ನಮ್ಮ ಅಭಿಪ್ರಾಯವನ್ನು ಪರಿಗಣಿಸಿದ್ದಕ್ಕಾಗಿ ನಾವು ಅವರಿಗೆ ಧನ್ಯವಾದ ಅರ್ಪಿಸಿದ್ದೇವೆ ಎಂದು ಹೇಳಿದರು. ಆಪರೇಷನ್ ಸಿಂಧೂರ್ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಸಭೆಯಲ್ಲಿ ಅಭಿನಂದಿಸಲಾಗಿದೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಎಚ್ಪಿ ನಾಯಕರನ್ನು ಬಂಧಿಸಲು ಪ್ರಯತ್ನಿಸಿತ್ತು.
ನಂತರ ಛಲವಾದಿ ನಾರಾಯಣಸ್ವಾಮಿ ಅವರನ್ನು ಅಕ್ರಮವಾಗಿ ಬಂಧಿಸಲಾಗಿತ್ತು. ಈಗ, ಮುಖ್ಯ ಸಚೇತಕ ರವಿಕುಮಾರ್ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಿದ ಹೊರತಾಗಿಯೂ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೋರ್ ಕಮಿಟಿ ಸಭೆಯಲ್ಲಿ ಈ ಎಲ್ಲಾ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು.