“ಕೇಂದ್ರ ಚುನಾವಣಾ ಆಯೋಗ ಮಾರ್ಚ್ 16 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಮಾರ್ಚ್ 14 ರಂದು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ‘ಪರಿಬರ್ತನ್ ಯಾತ್ರೆ’ಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. 
ಇದಾದ ಎರಡು ದಿನಗಳ ನಂತರ, ಅಂದರೆ ಮಾರ್ಚ್ 16 ರಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದೆ. ECI ಮೂಲಗಳ ಪ್ರಕಾರ, ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಮೊದಲ ಹಂತವು ಏಪ್ರಿಲ್ ಎರಡನೇ ವಾರದ ಕೊನೆಯಲ್ಲಿ ಅಥವಾ ಮೂರನೇ ವಾರದಲ್ಲಿ ನಡೆಯಬಹುದು.
ಚುನಾವಣಾ ಆಯೋಗವು ಬಂಗಾಳವನ್ನು ಹೊರತುಪಡಿಸಿ, ಇತರ ನಾಲ್ಕು ರಾಜ್ಯಗಳಾದ ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಅದೇ ದಿನ ಪ್ರಕಟಿಸಲಿದೆ. ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಜೊತೆಗೆ, ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ರಾಜಕೀಯ ಪಕ್ಷಗಳು, ಒಂದು ಹಂತದಲ್ಲಿ ಅಥವಾ ಗರಿಷ್ಠ ಎರಡು ಹಂತಗಳಲ್ಲಿ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿವೆ. 
ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಕೇಂದ್ರ ಚುನಾವಣಾ ಆಯೋಗವು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯೊಂದಿಗೆ ರಾಜ್ಯದ ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆ ಇದೆ. 
ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ವೈಎಸ್ ಮೇಟಿ ಅವರ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿವೆ. ಈ ಎರಡು ಕ್ಷೇತ್ರಗಳಿಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಇದೆ.
Leave a comment