ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನ ಕೋಲ್ಕತ್ತಾ ಕೇಂದ್ರ ಭಾಗದ ಗಿರೀಶ್ ಪಾರ್ಕ್ ಬಳಿ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.

ಮೋದಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಬ್ರಿಗೇಡ್ ಪರೇಡ್ ಮೈದಾನದಿಂದ ಸುಮಾರು 5 ಕಿ.ಮೀ ದೂರದಲ್ಲೇ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾ ರ್ಯಾಲಿ ಸ್ಥಳದ ಕಡೆಗೆ ಹೋಗುತ್ತಿದ್ದಾಗ ಕೆಲವು ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಕಲ್ಲುಗಳನ್ನು ಎಸೆಯಲಾಯಿತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಯಾವುದೇ ಪ್ರಚೋದನೆಯಿಲ್ಲದೆ ನಮ್ಮ ಮೇಲೆ ಕಲ್ಲುಗಳನ್ನು ಎಸೆಯಲಾಯಿತು. ಅವರು ನಮ್ಮನ್ನೂ ನಿಂದಿಸಿದರು” ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಬಂಗಾಳಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಕಲ್ಲುಗಳನ್ನು ಎಸೆದು, ಘೋಷಣೆಗಳನ್ನು ಕೂಗಿದ್ದಾರೆ. ಘರ್ಷಣೆಯ ಸಮಯದಲ್ಲಿ ಹಲವಾರು ವಾಹನಗಳು ಹಾನಿಗೊಳಗಾದವು ಎಂದು ಬಿಜೆಪಿ ಆರೋಪಿಸಿದೆ.

ಆದಾಗ್ಯೂ, ಸ್ಥಳೀಯ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಆರೋಪಗಳನ್ನು ನಿರಾಕರಿಸಿದ್ದು, ಅವರೇ ಮೊದಲು ನಮ್ಮನ್ನು ನಿಂದಿಸಿ ತಮ್ಮ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ. ಸ್ಥಳೀಯ ಟಿಎಂಸಿ ನಾಯಕರ ನಿವಾಸದ ಮೇಲೂ ಕಲ್ಲುಗಳನ್ನು ಎಸೆಯಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳದಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯ ರಾಜ್ಯವ್ಯಾಪಿ ‘ಪರಿವರ್ತನ ಯಾತ್ರೆ’ಯ ಸಮಾರೋಪ ಸಮಾರಂಭ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿದ್ದು, ಮೋದಿ ರ್ಯಾಲಿಗೆ ಕೇವಲ ಅರ್ಧ ಗಂಟೆ ಮೊದಲು ಈ ಘಟನೆ ನಡೆದಿದೆ.

Leave a comment