
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಶೀಲಮ್ಮರ ಮೆದೇಹಳ್ಳಿ ರಸ್ತೆ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ವಾಸುದೇವ್ ರಾಮ್ ಹಾಗೂ ಡಿ ವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಬಳ್ಳಾರಿಯಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮೀನುಗಾರಿಕ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಬಳ್ಳಾರಿ ನಗರದ ಸಿದ್ಧಾರ್ಥ್ ನಗರದಲ್ಲಿರುವ ಮನೆ ಸೇರಿದಂತೆ ಒಟ್ಟು ನಾಲ್ಕು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಬಗ್ಗೆ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಶಿವಣ್ಣ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡ್ತಿದ್ದಾರೆ. ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.
ಶಿಕಾರಿಪುರ ಬಳಿ ತರಲಘಟ್ಟ ನಿವಾಸ, ಸಾಗರ ತಾಲೂಕಿನ ಆನಂದಪುರ ಬಳಿ ಆಚಾಪುರ ಶಾಲೆ-ಕಚೇರಿ ಹಾಗೂ ಚಾಲುಕ್ಯ ನಗರದ ರಾಘವೇಂದ್ರ ಅವರ ನಿವಾಸ ಸೇರಿ 3-4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಸಿದ ದೂರಿನ ಮೇರೆಗೆ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಕಚೇರಿ ಹಾಗೂ ನಿವಾಸಗಳಲ್ಲಿ ಆದಾಯ-ಆಸ್ತಿ ವಿವರಗಳು, ಬ್ಯಾಂಕ್ ದಾಖಲೆಗಳು, ಖರೀದಿ-ಮಾರಾಟ ಪತ್ರಗಳನ್ನು ಅಧಿಕಾರಿಗಳು ತೀವ್ರವಾಗಿ ಪರಿಶೀಲಿಸುತ್ತಿವೆ. ಶೋಭಾ ಅವರ ವಿರುದ್ಧ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ಇನ್ನೂ ಗಂಭೀರವಾಗಿ ನಡೆಯುತ್ತಿದೆ.
ಇನ್ನು ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಅಜಯ್ ಸಿಂಗ್ ರಜಪೂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಬೆಳಗಾವಿ ಆಂಜನೇಯ ನಗರ, ಅಥಣಿ ಹಾಗೂ ಹುಕ್ಕೇರಿ ಸೇರಿದಂತೆ ಮೂರು ಸ್ಥಳಗಳಲ್ಲಿಯೂ ಏಕಕಾಲದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಒಂದು ಕೆಜಿ ಚಿನ್ನಾಭರಣಗಳು ಪತ್ತೆಯಾಗಿವೆ. ಬ್ಯಾಂಕ್ನಲ್ಲಿ ಎರಡು ಕೋಟಿ ರೂಪಾಯಿ ಠೇವಣಿ ಪತ್ತೆಯಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಡಿವೈಎಸ್ಪಿ ಬಿ.ಎಸ್. ಪಾಟೀಲ್ ಮತ್ತು ಭರತ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಜಯ್ ಸಿಂಗ್ ನಗರದಲ್ಲೇ ಅಕ್ಕಪಕ್ಕದಲ್ಲಿ ಮೂರು ಮನೆಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತ ಪೊಲೀಸರು ಮಂಡ್ಯ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ವಿರುದ್ಧ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.
ಮೈಸೂರಿನ ಕಚೇರಿ ಹಾಗೂ ಮಂಡ್ಯದ ಎರಡು ನಿವಾಸಗಳಲ್ಲಿ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿಎಸ್ಪಿ ಶೈಲೇಂದ್ರ ಮತ್ತು ವೆಂಕಟೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಶಶಿಕುಮಾರ್ ಸೇರಿದಂತೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಸದ್ಯ ಅಧಿಕಾರಿಗಳು ಆಸ್ತಿ ವಿವರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Leave a comment