ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಆದೇಶ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ
ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತೃತೀಯ ಭಾಷೆ ವಿಷಯದಲ್ಲಿ ಈಗಿನ ವ್ಯವಸ್ಥೆಯನ್ನು ಬದಲಾಯಿಸಬಾರದು ಹಾಗೂ ಅಂಕಗಳನ್ನು ಮುಂದುವರೆಸಬೇಕೆಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಧು ಬಂಗಾರಪ್ಪ ಅವರು, ಸರ್ಕಾರ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ–1 ಫಲಿತಾಂಶಗಳನ್ನು ವಿಳಂಬ ಮಾಡದೇ ಹೊರತರುವುದು ಸರ್ಕಾರದ ಆದ್ಯತೆಯಾಗಿದೆ. 
ಆದ್ದರಿಂದ ಈ ವಿಚಾರವನ್ನು ದೀರ್ಘಗೊಳಿಸುವುದಿಲ್ಲ. ಕಾನೂನು ಸಲಹೆಗಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಈಗಾಗಲೇ ಪ್ರಕಟಿಸಿದ್ದ ಕರಡು ಅಧಿಸೂಚನೆಯನ್ನು ಹಿಂಪಡೆಯಲಾಗುವುದಿಲ್ಲ ಎಂದೂ ಸಚಿವರು ಹೇಳಿದ್ದಾರೆ. ಜನರಿಂದ ಸಲಹೆ ಪಡೆಯಲು ಅದನ್ನು ಪ್ರಕಟಿಸಲಾಗಿತ್ತು. ಹೈಕೋರ್ಟ್ ಕೂಡ ಪರೀಕ್ಷೆ ಆರಂಭಕ್ಕೂ ಮುನ್ನ ಇದ್ದ ನಿಯಮಗಳನ್ನೇ ಅನುಸರಿಸಬೇಕು ಮತ್ತು ಮಧ್ಯದಲ್ಲಿ ಬದಲಾವಣೆ ಮಾಡಬಾರದು ಎಂದು ಹೇಳಿದೆ ಎಂದು ತಿಳಿಸಿದರು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಎ, ಬಿ, ಸಿ ಗ್ರೇಡ್ ನೀಡುವ ಕುರಿತು ಶಿಕ್ಷಣ ಇಲಾಖೆ ಮೊದಲು ಕರಡು ಪ್ರಕಟಿಸಿತ್ತು.
ಇದರಿಂದ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಸುವ ಯೋಜನೆ ಕೂಡ ಘೋಷಿಸಲಾಗಿತ್ತು. ಕನ್ನಡ ಪರ ಸಂಘಟನೆಗಳ ಮನವಿಯ ಹಿನ್ನೆಲೆಯಲ್ಲಿ ಹಿಂದಿ ಭಾಷಾ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯಗಳು ಕೇಳಿಬಂದಿದ್ದವು. ಕಳೆದ ವರ್ಷ ಸುಮಾರು 1.48 ಲಕ್ಷ ವಿದ್ಯಾರ್ಥಿಗಳು ಹಿಂದಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಹಿನ್ನೆಲೆಯಲ್ಲಿ ಗ್ರೇಡ್ ವ್ಯವಸ್ಥೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದರು.
Leave a comment