“ಮಂಗಳೂರು: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಧಿ ವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡಿ ಕಾಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. 
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಮೂವರು ಸದಸ್ಯರ ತಂಡವು ಎಸ್ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ. ಈ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ್ದ ತಲೆ ಬುರುಡೆಯನ್ನು ಕಾಡಿನಿಂದ ಹೊರತೆಗೆದಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. 
ಬಳಿಕ ಆ ತಲೆ ಬುರುಡೆಯನ್ನು ನಾನು ನೆಲದಿಂದ ಹೊರತೆಗೆದಿಲ್ಲ ಎಂದು ಚಿನ್ನಯ್ಯ ಪೊಲೀಸರ ಮುಂದೆ ಒಪ್ಪಿಕೊಂಡಿದ್ದ ತಲೆಬುರುಡೆ ತೆಗೆಯುವ ದೃಶ್ಯವನ್ನು ಚಿತ್ರೀಕರಿಸಿದ್ದ ಪ್ರದೀಪ್ ಕುಲಾಲ್ ಎಂಬಾತ ಈ ಬಗ್ಗೆಎಸ್ ಐಟಿ ಮುಂದೆ ಹೇಳಿಕೆ ನೀಡಿದ್ದ. ಆತನನ್ನು ಎಸ್ ಐಟಿ ಹಾಗೂ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಜೊತೆಯಲ್ಲಿ ಕಾಡಿನಲ್ಲಿ ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. 
ತಲೆಬುರುಡೆ ಪತ್ತೆಯಾದ ಸ್ಥಳಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳ ಅಗತ್ಯ ಇರುತ್ತದೆ. ಅದಕ್ಕಾಗಿ ವಿಧಿ ವಿಜ್ಞಾನ ತಂಡ ಹಾಗೂ ಎಸ್ ಐಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.”

Leave a comment