“ಮಹಾಮಾರಿ ಕೊರೊನಾ ಬಿಕ್ಕಟ್ಟಿನ ವೇಳೆ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ನಿಯಮಬಾಹಿರವಾಗಿ ಖರೀದಿಸಿ ಸರ್ಕಾರ ಬೊಕ್ಕಸಕ್ಕೆ ಸುಮಾರು 167 ಕೋಟಿ ರೂ. ನಷ್ಟ ಮಾಡಿದ ಆರೋಪದ ಸಂಬಂಧ ಖಾಸಗಿ ಕಂಪನಿಗಳ ಮಾಲೀಕರು ಹಾಗೂ ವೈದ್ಯಕೀಯ ಇಲಾಖೆಯ ಅಧಿಕಾರಿಗಳ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಲೆಕ್ಕ ಪತ್ರಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಎಂಬವರು ನೀಡಿದ ದೂರು ಆಧರಿಸಿ ವೈದ್ಯ ಡಾ.ಗಿರೀಶ್, ಇಲಾಖೆಯ ಅಧಿಕಾರಿಗಳಾದ ಜೆ.ಪಿ.ರಘು ಮುನಿರಾಜು, ಲಾಜ್ ಎಕ್ಸ್ಪರ್ಟ್ ಹಾಗೂ ಪ್ರೊಡೆಂಟ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅವ್ಯವಹಾರದಲ್ಲಿ ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಪ್ರಬಲವಾಗಿದ್ದು, ಎಫ್ಐಆರ್ನಲ್ಲಿ ಅವರ ಹೆಸರು ಉಲ್ಲೇಖಿಸದೇ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋವಿಡ್-19 ಹರಡಿದ್ದ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಸಾಂಕ್ರಾಮಿಕ ರೋಗ ನಿವಾರಣೆಗೆ ಅತ್ಯವಶ್ಯಕವಾಗಿ ಬೇಕಾಗಿದ್ದ ಎನ್ 95 ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರ ಸಾಮಗ್ರಿಗಳನ್ನು ಸಂಗ್ರಹಿಸಿರುವ ಸನ್ನಿವೇಶವನ್ನು ದುಬರ್ಳಕೆ ಮಾಡಿಕೊಂಡು ಕಾನೂನಿನ ಎಲ್ಲಾ ಪ್ರಕ್ರಿಯೆ ಗಾಳಿಗೆ ತೂರಿ 167 ಕೋಟಿ ರೂಪಾಯಿ ನಷ್ಟ ಉಂಟು ಮಾಡಿರುವ ಆರೋಪವಿದೆ.
2020ರ ಆಗಸ್ಟ್ 18ರಂದು ಸರ್ಕಾರ ವತಿಯಿಂದ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ 2.59 ಲಕ್ಷ ಎನ್ 95 ಮಾಸ್ಕ್ ಹಾಗೂ 2.59 ಪಿಪಿಇ ಕಿಟ್ ಖರೀದಿಸಲು ಅನುಮತಿ ಪಡೆದುಕೊಳ್ಳಲಾಗಿತ್ತು.
ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ, ರಾಜ್ಯದ 17 ಸರ್ಕಾರಿ ಕಾಲೇಜು ಹಾಗೂ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಳಸಲು ಅನುಮೋದನೆ ನೀಡಲಾಗಿತ್ತು.
ಅನುಮೋದನೆ ಪಡೆಯುವಾಗ ಕೆಟಿಪಿಪಿ ಕಾನೂನಿನ ಕಾಯ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಪಾಲಿಸಬೇಕು. 41.35 ಕೋಟಿ ರೂ.ಗಿಂತ ಮೌಲ್ಯದ ಹೆಚ್ಚು ಸಾಮಗ್ರಿ ಖರೀದಿಸಕೂಡದು ಎಂದು ಷರತ್ತು ವಿಧಿಸಲಾಗಿತ್ತು.
ಇದರ ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯು ಟೆಂಡರ್ ಕರೆದಿದ್ದು, ಲಾಜ್ ಕೋರ್ಟ್ಸ್ ಸಂಸ್ಥೆಯು ಒಂದು ಪಿಪಿಇ ಕಿಟ್ ಸರಬರಾಜು ಮಾಡುವುದಾಗಿ ಬಿಡ್ ಪಡೆದುಕೊಂಡಿತ್ತು.
ನಿಗದಿತ ಸಂಖ್ಯೆಯ ಪಿಪಿಇ ಕಿಟ್ಗಳನ್ನು 15 ದಿನಗಳೊಳಗೆ ಸರಬರಾಜು ಮಾಡಲು ಆದೇಶಿಸಿದ್ದರೂ ಪಿಇಇ ಕಿಟ್ ಗಳನ್ನು 17 ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೀಡಿರುವ ಬಗ್ಗೆ ಯಾವುದೇ ದಾಖಲೆಗಳಲ್ಲಿ ನಮೂದಿಸಿಲ್ಲ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಕೋವಿಡ್- 19 ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ದಳ) ರಚಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು.
ಹಿರಿಯ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ಶನಿವಾರ ಅಥವಾ ಭಾನುವಾರ ರಚನೆ ಆಗಲಿದೆ. ವಿಧಾನಸೌಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.