“ಭಾನುವಾರ ಇಲ್ಲಿ ನಡೆದ ಎಎಪಿ ಶಾಸಕರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ 22 ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಕುರಿತು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ‘ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು.
ಪ್ರಬಲ ಪ್ರತಿಪಕ್ಷವು ಜನರ ಧ್ವನಿಯನ್ನು ಎತ್ತಿ ಹಿಡಿಯುತ್ತದೆ. ಆಮ್ ಆದ್ಮಿ ಪಕ್ಷವು ಬಿಜೆಪಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತದೆ’ ಎಂದರು. ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಫೆಬ್ರುವರಿ 24 ರಿಂದ ಆರಂಭವಾಗಲಿದೆ.
ಮೂರು ದಿನ ನಡೆಯುವ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಸರ್ಕಾರದ ವಿರುದ್ಧ ಬಾಕಿ ಉಳಿದಿರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.
ಫೆಬ್ರುವರಿ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.
ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವಾರು ಪ್ರಮುಖ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದಾರೆ