ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚನೆ ಮಾಡಲಾಗಿರುವ ಸಮಿತಿ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕಾಂಗ್ರೆಸ್ನ ಎಚ್.ಎಂ.ರೇವಣ್ಣ, ಎಸ್.ಆರ್.ಪಾಟೀಲ್ ಬ್ಯಾಡಗಿ, ಡಾ.ಪುಷ್ಪ ಅಮರನಾಥ್, ಮೆಹರೋಝ್ ಖಾನ್, ಸೂರಜ್ ಹೆಗ್ಡೆ ಅವರ ನೇಮಕ ಪ್ರಶ್ನಿಸಿ ಪಿ.ರಾಜೀವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ಎಂ.ಅರುಣ್ ಶ್ಯಾಮ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದು ಸಂವಿಧಾನದ 164 (1ಎ) ವಿಧಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದ್ದು, ಉಪಾಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದೆ.
ಅನುಷ್ಠಾನ ಸಮಿತಿಗೆ ನೇಮಕವಾಗಿರುವವರು (ಕಾಂಗ್ರೆಸ್) ಪಕ್ಷವೊಂದರ ಪ್ರತಿನಿಧಿಗಳಾಗಿದ್ದಾರೆ. ಸಂಪುಟ ದರ್ಜೆ ಮತ್ತು ರಾಜ್ಯ ಸಚಿವರಿಗೆ ದೊರೆಯುವ ವೇತನ, ಸೌಲಭ್ಯ ಕಲ್ಪಿಸಲಾಗಿದೆ. ಈ ನೇಮಕಾತಿ ಮಾತ್ರ ಆಕ್ಷೇಪಾರ್ಹವಲ್ಲ. ನೇಮಕಗೊಂಡಿರುವವರು ಪ್ರಮುಖ ಪಾತ್ರವನ್ನು ನಿಭಾಯಿಸಲಿದ್ದು, ಕಾರ್ಯಾಂಗಕ್ಕೆ ನಿರ್ದೇಶನ ನೀಡುತ್ತಿದ್ದಾರೆ.
ಅಲ್ಲದೇ, ನೇಮಕಗೊಂಡಿರುವವರ ಶೈಕ್ಷಣಿಕ ಅರ್ಹತೆಯನ್ನು ನೋಡಿದರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಷ್ಟುಮಾತ್ರವಲ್ಲದೇ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಲಾಗಿದೆ ಎಂದು ಆಕ್ಷೇಪಿಸಿದರು.
ವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರ ವಾದದಲ್ಲಿ ಸತ್ಯಾಂಶ ಇದ್ದರೆ, ಸರ್ಕಾರದ ಕ್ರಮ ಸ್ವಾಗತಾರ್ಹವಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಬಳಿಕ ವಿಚಾರಣೆಯನ್ನು ಮಾರ್ಚ್ 27ಕ್ಕೆ ಮುಂದೂಡಿತು.