ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧದ ಬಿಜೆಪಿ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸೋಮವಾರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಡ್ರಮ್ ಬಾರಿಸುವ ಮೂಲಕ ಚಾಲನೆ ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಈ ಯಾತ್ರೆ ನಡೆಸುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್, ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತಿತರ ನಾಯಕರು ಉಪಸ್ಥಿತರಿದ್ದರು. ಬಳಿಕ ಪ್ರಲ್ಹಾದ್ ಜೋಶಿ ಮತ್ತಿತರ ನಾಯಕರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಸಾವಿರಾರು ಬಿಜೆಪಿ ಕಾರ್ಯಕರ್ತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸುವ ಮುನ್ನಾ ಪ್ರಲ್ಹಾದ್ ಜೋಶಿ ಮತ್ತಿತರ ನಾಯಕರು ಚಾಮುಂಡೇಶ್ವರ ಬೆಟ್ಟಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ದರಗಳು ವಿಪರೀತವಾಗಿ ಏರಿಕೆಯಾಗಿದೆ.
ಮತ್ತೊಂದೆಡೆ ಧರ್ಮಾಧಾರಿತ ಮೀಸಲಾತಿಗೆ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸರ್ಕಾರ ಮುಸಲ್ಮಾನರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಮಾವಧಿಯಾಗಿದೆ ಎಂದರು.
ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ವಿರುದ್ಧ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಅಡಿಯಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಪ್ರತಿಕ್ರಿಯಿಸಿದ ಜೋಶಿ, “ರಾಜ್ಯ ಸರ್ಕಾರವು ತರಾತುರಿಯಲ್ಲಿ ದರ ಹೆಚ್ಚಿಸಿದೆ. 2 ರೂಪಾಯಿ ಹೆಚ್ಚಳವನ್ನು ಕೇಂದ್ರ ಸರ್ಕಾರದ ಕಂಪನಿಗಳು ಭರಿಸಲಿದೆ. ನಾವು ಆ 2 ರೂ. ಹೊರೆಯನ್ನು ಗ್ರಾಹಕರ ಮೇಲೆ ಹೊರಿಸುತ್ತಿಲ್ಲ ಎಂದರು.
ತೆರಿಗೆ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೂ ಲಾಭವಾಗಲಿದೆ, ಏಕೆಂದರೆ ಅದು ಪಾಲು ಪಡೆಯುತ್ತದೆ ಎಂದು ಅವರು ಹೇಳಿದರು.
ಏಪ್ರಿಲ್ 7 ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದ್ದು, ಏಪ್ರಿಲ್ 8 ರಂದು ಬೆಳಿಗ್ಗೆ ಮಂಡ್ಯ ಮತ್ತು ಮಧ್ಯಾಹ್ನ ಹಾಸನದಲ್ಲಿ,
ಏಪ್ರಿಲ್ 9 ರಂದು ಕೊಡಗು ಮತ್ತು ಮಂಗಳೂರು, ಏಪ್ರಿಲ್ 10 ರಂದು ಉಡುಪಿ ಮತ್ತು ಚಿಕ್ಕಮಗಳೂರು ಮೊದಲ ಹಂತದ ಪ್ರತಿಭಟನೆಗೆ ಸಾಕ್ಷಿಯಾಗಲಿದೆ.