“ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದು, ಈ ಕುರಿತು ಚರ್ಚಿಸಲು ಗುರುವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟವು ಯಾವುದೇ ಪ್ರಮುಖ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಜಾತಿ ಗಣತಿ ವರದಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು.
ಅದಕ್ಕು ಮುನ್ನ ಲಿಖಿತವಾಗಿ ಅಥವಾ ಮೌಖಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಕೇಳಿಕೊಂಡಿದ್ದಾರೆ ಎಂದು ಹೇಳಿದರು.
ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಈ ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ
ಮತ್ತು ಇದನ್ನು “ಅವೈಜ್ಞಾನಿಕ” ಎಂದು ಕರೆದಿದ್ದಾರೆ. ಅಲ್ಲದೆ ವರದಿಯನ್ನು ತಿರಸ್ಕರಿಸಬೇಕು ಮತ್ತು ಹೊಸ ಸಮೀಕ್ಷೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಸಭೆಯಲ್ಲಿ ಸಚಿವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಯಾರೂ ಸಹ ಜಾತಿ ಗಣತಿ ವರದಿಯನ್ನು ವಿರೋಧಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳಬೇಕೋ ಅಥವಾ ನಿರಾಕರಣೆ ಮಾಡಬೇಕೋ ಎಂಬ ನಿಟ್ಟಿನಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದು ಹಲವು ಸಚಿವರು ತಿಳಿಸಿದ್ದಾರೆ
. ಹೀಗಾಗಿ ಮೇ 2 ರಂದು ನಡೆಯುವ ಮುಂದಿನ ಸಚಿವ ಸಂಪುಟದಲ್ಲಿ ಮತ್ತೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚೆ ನಡೆಯಲಿದೆ.